ಮಡಿಕೇರಿ ಜೂ.03: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಅವರಿಗೆ ಅಧಿಕಾರದ ಗದ್ದುಗೆಯ ಜೊತೆಯಲ್ಲೇ ರಾಜ್ಯದ ತೀವ್ರ ಆರ್ಥಿಕ ಮತ್ತು ಆಡಳಿತಾತ್ಮಕ ಬಿಕ್ಕಟ್ಟಿನ ದೊಡ್ಡ ಸವಾಲೂ ಎದುರಿಗಿದೆ ಎಂದು ಕೊಡಗು ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರು ತಮ್ಮ ಅಭಿಪ್ರಾಯ ವ್ಯಕಪಡಿಸಿದ್ದಾರೆ.
ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಏರುಪೇರಾಗಿದ್ದು, ಕಂದಾಯ ಉಳಿಕೆ (Revenue Surplus) ಹೊಂದಿದ್ದ ಕರ್ನಾಟಕ, ಪ್ರಸ್ತುತ 22,957 ಕೋಟಿ ರೂಪಾಯಿಗಳಷ್ಟು ರಾಜಸ್ವ ಕೊರತೆ ಎದುರಿಸುತ್ತಿದೆ. ಅಷ್ಟೇ ಅಲ್ಲದೆ, ರಾಜ್ಯದ ಒಟ್ಟು ಸಾಲದ ಹೊರೆ ರೂಪಾಯಿ 8.24 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಸುಮಾರು 2,600 ಕ್ಕೂ ಹೆಚ್ಚು ಅಭಿವೃದ್ಧಿ ಯೋಜನೆಗಳು ಹಣದ ಕೊರತೆಯಿಂದ ನನೆಗುದಿಗೆ ಬಿದ್ದಿವೆ. ಇದರೊಂದಿಗೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕಾನೂನು ಸುವ್ಯವಸ್ಥೆಯ ಸವಾಲುಗಳ ಮಧ್ಯೆಯೇ ನೂತನ ಸಿಎಂ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ರಾಜಕೀಯವಾಗಿ ಅಧಿಕಾರ ಹಸ್ತಾಂತರ ಸುಗಮವಾಗಿ ನಡೆದಿದ್ದರೂ, ಆಡಳಿತಾತ್ಮಕವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮುಳ್ಳಿನ ಹಾಸಿಗೆಯಾಗಿದೆ. ತಮ್ಮದೇ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟನ್ನು ಅವರು ಹೇಗೆ ನಿಭಾಯಿಸಲಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹೇಗೆ ಮರುಜೀವ ನೀಡಲಿದ್ದಾರೆ ಎಂಬುದನ್ನು ಇಡೀ ರಾಜ್ಯ ಕುತೂಹಲದಿಂದ ಕಾಯ್ದು ನೋಡುತ್ತಿದೆ ಎಂದು ಅವರು ತಿಳಿಸಿದ್ದಾರೆ.




